ಯೋಗದಿಂದ ವಿದ್ಯಾರ್ಥಿಗಳಲ್ಲಿ ಜ್ಞಾಪಕ ಶಕ್ತಿ ವೃದ್ಧಿ: ಇಸ್ವಿ ಪಂಪಾಪತಿ

ಯೋಗದಿಂದ ವಿದ್ಯಾರ್ಥಿಗಳಲ್ಲಿ ಜ್ಞಾಪಕ ಶಕ್ತಿ ವೃದ್ಧಿ: ಇಸ್ವಿ ಪಂಪಾಪತಿ Yoga improves memory power in students: Isvi Pampapati

ಬಳ್ಳಾರಿ 24:  ಕೇಂದ್ರ ಸರ್ಕಾರದ ಮೇರಾ ಯುವ ಭಾರತ ಬಳ್ಳಾರಿ, ಜಿಲ್ಲಾ ಪತಂಜಲಿ ಯೋಗ ಸಮಿತಿ ಹಾಗೂ ಕರುಣ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಇವುಗಳ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ನಗರದ ಅಂಬೇಡ್ಕರ್ ಮತ್ತು ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ರಾಜ್ಯ ಸಮಿತಿ ಸದಸ್ಯರಾದ ಇಸ್ವಿ ಪಂಪಾಪತಿ ಅವರು ಉದ್ಘಾಟಿಸಿದರು.ಬಳಿಕ ವಿದ್ಯಾರ್ಥಿಗಳಿಗೆ ಯೋಗ, ಧ್ಯಾನ, ಆಸನ ಹಾಗೂ ಪ್ರಾಣಾಯಾಮಗಳನ್ನು ಮಾಡಿಸುವುದರ ಜೊತೆಗೆ ಅವುಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ ಅಭ್ಯಾಸದಿಂದ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ.

ಉತ್ತಮ ಸಂಸ್ಕಾರ, ಸಂಸ್ಕೃತಿ, ಒಳ್ಳೆಯ ನಡತೆ ಹಾಗೂ ಜ್ಞಾಪಕ ಶಕ್ತಿ ವೃದ್ಧಿಸುವುದರ ಜೊತೆಗೆ ಆರೋಗ್ಯಕರ ಜೀವನ ಮತ್ತು ಆತ್ಮಸ್ಥೈರ್ಯ ವೃದ್ಧಿಯಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿತ್ಯವೂ ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಇದೇ ವೇಳೆ ಜಿಲ್ಲಾ ಪತಂಜಲಿ ಯೋಗ ಸಮಿತಿಯ ಉಪಾಧ್ಯಕ್ಷ ಕೆ. ಪ್ರಕಾಶ್ ಅವರು ವಿವಿಧ ಯೋಗಾಸನಗಳ ಪ್ರದರ್ಶನ ನೀಡಿ, ಅವುಗಳಿಂದಾಗುವ ಉಪಯುಕ್ತತೆಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಬಿಸಿಎಂ ವಸತಿ ನಿಲಯದ ವಾರ್ಡನ್ ದುರ್ಗಪ್ಪ, ಮಾಜಿ ಸೈನಿಕರಾದ ಈಶ್ವರ ರೆಡ್ಡಿ ಸೇರಿದಂತೆ ವಸತಿ ನಿಲಯದ ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಯೋಗಾಭ್ಯಾಸ ನಡೆಸಿದರು.